
ನವದೆಹಲಿ: ಇಂದು ಸಂಜೆಯೊಳಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ. ಸಂಪುಟ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಎಷ್ಟು ಜನ ಮಂತ್ರಿಗಳಾಗಬೇಕು? ಎಷ್ಟು ಜನರು ಸಂಪುಟದಲ್ಲಿರಬೇಕು ಎಂಬುದನ್ನು ಹೈಕಮಾಂಡ್ ತಿಳಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ನಾವು ಬೇರೆ ಬೇರೆ ವಿಂಗಡನೆ ಮಾಡಿರುವ ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ. ನಮ್ಮ ಪಕ್ಷದಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ಬಿಜೆಪಿಯವರೇ. ನಾವು ಹೇಳಿದ್ದನ್ನು ಕೇಳಿಸಿಕೊಂಡು ಇಂದು ಹೈಕಮಾಂಡ್ನಿಂದ ಪಟ್ಟಿ ಬಿಡುಗಡೆ ಮಾಡುತ್ತಾರೆ. ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಪ್ರಾದೇಶಿಕತೆ, ಸಮುದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಸಂಪುಟ ಪಟ್ಟಿ ಬಿಡುಗಡೆ ಮಾಡುತ್ತಾರೆ.

ಇಂದು ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡಲಿದ್ದು, ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪ್ರಮಾಣ ವಚನದ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದರು.
ಸಚಿವ ಸಂಪುಟ ರಚನೆ ಸಂಬಂಧ ಮಹತ್ವದ ಚರ್ಚೆಯಲ್ಲಿ ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದರು.











