
ಉಪ್ಪಿನಂಗಡಿ: ಇತ್ತೀಚಿಗೆ ನಡೆದ ಪ್ರಕರಣವೊಂದರಲ್ಲಿ ಆರೋಪಿಯೋರ್ವನನ್ನು ಬಂಧಿಸಿದ ಕಾರಣಕ್ಕಾಗಿ ಪಿ.ಎಫ್. ಐ. ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಡಿ.14 ರಂದು ರಾತ್ರಿ ನಡೆದಿದೆ.
ಇದೇ ವೇಳೆ ಠಾಣೆ ಗೆ ನುಗ್ಗಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ ಸಂದರ್ಭದಲ್ಲಿ ಬಂದೋಬಸ್ತ್ ಗಾಗಿ ತೆರಳಿದ ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ರವರ ಮೇಲೆ ಹಲ್ಲೆ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸನ್ನ ರವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ವೈರಲ್ ಆಗುತ್ತಿದೆ…

ಘಟನೆಯಲ್ಲಿ ಪೊಲೀಸ್ಇನ್ಸ್ ಪೆಕ್ಟರ್ ಉಮೇಶ್, ಮಹಿಳಾ ಎಸ್.ಐ ವಾಮನ ಕುಟ್ಟಿ ಹಾಗೂ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗಳ ಸಹಿತ ಸಿಬ್ಬಂದಿಗಳು ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವುದಾಗಿ ಹೇಳಿಕೊಂಡು 16 ಮಂದಿ ಪಿ.ಎಫ್.ಐ. ಕಾರ್ಯಕರ್ತರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರಲ್ಲಿ 12 ಮಂದಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.4 ಜನ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತೀವ್ರ ಗಾಯಗೊಂಡಿರುವ ಕೆಲವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆ ಮುಂದೆಯೂ ಗುಂಪು ಜಮಾಯಿಸಿ ತುಸು ಉದ್ದಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳ ಸುತ್ತ ಪೊಲೀಸ್ ಕಾವಲು ವ್ಯವಸ್ಥೆ ಮಾಡಲಾಗಿದೆ.


