

ಹಾಸನ: ಇಲ್ಲಿನ ಚನ್ನರಾಯಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ತಲೆನೋವು ಗುಣಪಡಿಸುವುದಾಗಿ ಹೇಳಿ ಅರ್ಚಕನೊಬ್ಬ ಬೆತ್ತದ ಕೋಲಿನಿಂದ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆ ಪಾರ್ವತಿ (47) ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಪಾರ್ವತಿ ಅವರು ತಲೆನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಇವರ ತಲೆ ನೋವು ಮಾತ್ರ ಕಡಿಮೆಯಾಗಿರಲಿಲ್ಲ. ಈ ಹಿನ್ನಲೆ ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ. ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಹಾಗೂ ದೇಹದ ಭಾಗಗಳಿಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ.
ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೂಜಾರಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.


