ವಿಟ್ಲ: ವಿಟ್ಲ ಪಡ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಜನರ ಸಮಸ್ಯೆಗಳನ್ನು ಕೇಳಿ ಅವರ ಸಮಸ್ಯೆ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.

ಗ್ರಾಮದ ಅಭಿವೃದ್ಧಿಗೆ ಆಯಾಯ ಭಾಗದ ಜನಪ್ರತಿನಿಧಿಗಳು ಆಲಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಜನರು ತಮ್ಮ ಕಷ್ಟಗಳನ್ನು ನೇರವಾಗಿ ತಿಳಿಸಿ ಹಾಗೂ ಸರ್ಕಾರದ ಹಲವಾರು ಸೌಲಭ್ಯಗಳಾದ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಕಲಚೇತನರ ವೇತನ, ಎಂಡೋಸಲ್ಫಾನ್ ಪೀಡಿತರ ವೇತನ, ಅಕ್ರಮ ಸಕ್ರಮ ಯೋಜನೆಗಳು, ಮಾತೃ ವಂದನಾ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ, ವಿಟ್ಲದ ಪಡ್ನೂರು ಗ್ರಾಮವು ಸರಿಯಾದ ಸೌಕರ್ಯಗಳನ್ನು ಒಳಗೊಂಡಿಲ್ಲ. ಆದ್ದರಿಂದ ಈ ಗ್ರಾಮವನ್ನು ಅಭಿವೃದ್ಧಿಯೆಡೆಗೆ ಸಾಗಿಸುವ ಕೆಲಸವಾಗಬೇಕಿದೆ. ಈ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒಡಗಿಸುವುದರೊಂದಿಗೆ ಜನರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯೆಡೆಗೆ ಕಾರ್ಯಕ್ರಮವು ಬಹಳ ಪ್ರಯೋಜನಕಾರಿಯಾಗಿದೆ ಎಂದರು.

ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ, ಲೋಕೋಪಯೋಗಿ ಇಲಾಖೆ, ಭೂ ದಾಖಲೆಗಳ ಇಲಾಖೆ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆ, ಸಾರಿಗೆ ಇಲಾಖೆ, ಸೇರಿದಂತೆ ಒಟ್ಟು 120 ಅರ್ಜಿಗಳು ಬಂದಿದ್ದು, ಅದರಲ್ಲಿ 30 ಅರ್ಜಿಗಳು ಸ್ಥಳದಲ್ಲಿ ಇತ್ಯಾರ್ಥವಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಶೋಭಾ ರೈ, ಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಶ್ಮಾ ಶಂಕರಿ, ಉಪಾಧ್ಯಕ್ಷ ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು. ಮಂಜು ವಿಟ್ಲ ನಿರೂಪಿಸಿದರು.










