
ದೆಹಲಿ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯು ಇಂದು (ಏಪ್ರಿಲ್ 6) ನಡೆಯಲಿದೆ. ಈ ಹಿನ್ನೆಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರ ಜತೆ ಸಂವಾದ ನಡೆಸಲಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಸಂಸದರು, ಸಚಿವರು, ಶಾಸಕರು, ಕಾರ್ಯಕರ್ತರ ಜತೆ ಸಂವಾದ ನಡೆಯಲಿದೆ. ಏಪ್ರಿಲ್ 7 ರಿಂದ 20ರ ವರೆಗೆ ದೇಶಾದ್ಯಂತ ಸಭೆ ಆಯೋಜನೆ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಸಭೆ, ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಹಿರಿಯ ನಾಯಕರೂ ಆಗಿರುವ ಅರುಣ್ ಸಿಂಗ್ ಮಾಹಿತಿ ನೀಡಿದ್ದಾರೆ.

ಭಾರತೀಯ ಜನತಾ ಪಕ್ಷವು ಏಪ್ರಿಲ್ 6 ರ ಬುಧವಾರದಂದು ತನ್ನ 42 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಪ್ರಸ್ತುತ ಭಾರತದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯು 1980 ರ ದಶಕದ ಆರಂಭದಿಂದ ಕಾರ್ಯ ನಿರ್ವಹಿಸಿಕೊಂಡು ಬಂದಿದೆ. ಹಲವು ಹಿರಿ- ಕಿರಿಯ ನಾಯಕರು ಸಂಘಟಿಸಿದ ಬಿಜೆಪಿ ಇದೀಗ ಪ್ರಮುಖ ರಾಷ್ಟ್ರೀಯ ಪಕ್ಷವಾಗಿ ಬೆಳೆದು ನಿಂತಿದೆ.

ಪಕ್ಷವು ಹಲವಾರು ಅಡೆತಡೆಗಳು ಮತ್ತು ವೈಫಲ್ಯಗಳನ್ನು ನಿವಾರಿಸಿ ನಡೆದು ಬಂದಿದೆ. ಪ್ರಸ್ತುತ ಭಾರತೀಯ ರಾಜಕೀಯ ಸನ್ನಿವೇಶದಲ್ಲಿ ದೃಢವಾದ ನೆಲೆಯನ್ನು ಕಂಡುಕೊಂಡಿದೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಬಲವಾಗಿ ಹೊರಹೊಮ್ಮಿದೆ.
ಈ ಬಾರಿಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕೆರೆಗಳನ್ನು ಸ್ವಚ್ಛಗೊಳಿಸುವುದು, ರಕ್ತದಾನ ಶಿಬಿರಗಳು, ಆರೋಗ್ಯ ತಪಾಸಣೆ ಮತ್ತು ಲಸಿಕೆ ಶಿಬಿರಗಳನ್ನು ಆಯೋಜಿಸುವುದು ಸೇರಿದಂತೆ ಕೆಲವು ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಕಾರ್ಯಕರ್ತರನ್ನು ಕೋರಲಾಗಿದೆ ಎಂದು ತಿಳಿದು ಬಂದಿದೆ.











