ಕೊಡಗು: ಅಕ್ರಮವಾಗಿ ಉಡಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದವರು ಬಂಧಿಸಿದ್ದಾರೆ.
ಸತೀಶ್, ಹನುಮಂತ ಹಾಗೂ ಶೆಟ್ಟಿ ಬಂಧಿತರು. ಮಡಿಕೇರಿ ಮೈಸೂರು ರಾಜ್ಯ ಹೆದ್ದಾರಿಯ ಚೈನ್ ಗೇಟ್ ಬಳಿ 3 ಜೀವಂತ ಉಡಗಳ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಮಡಿಕೇರಿ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ ಉಡಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರೀಕ್ಷಕ ಕೆ.ವಿ. ಶರತ್ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಸ್ವಾಮಿ ಮತ್ತು ಮಂಜುನಾಥ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.