ಉಡುಪಿ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿಯ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ ಪ್ರಸನ್ನ (40) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.ಉಡುಪಿ ಜಿಲ್ಲೆಯ ಬೈಂದೂರು ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿತ್ತು.
ಮರವಂತೆಯ ಸರ್ಕಾರಿ ಪ್ರೌಢಶಾಲೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಾವಿನಲ್ಲೂ ಶಿಲ್ಪಾ ಮನೆಯವರು ಅಂಗಾಂಗವನ್ನು ದಾನಕ್ಕೆ ನಿರ್ಧರಿಸಿ ಆರು ಜನರ ಬಾಳಿಗೆ ಬೆಳಕಾಗಿ ಸಾರ್ಥಕತೆ ಮೆರೆದಿದ್ದಾರೆ.
ಜೀವನ ಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ಯಕೃತ್ ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆಗೆ, ಒಂದು ಮೂತ್ರ ಪಿಂಡವನ್ನು ಮಂಗಳೂರಿನ ಎ.ಜೆ. ಆಸ್ಪತ್ರೆ ಹಾಗೂ ಎರಡು ಕಾರ್ನಿಯಾಗಳು, ಒಂದು ಮೂತ್ರ ಪಿಂಡ ಹಾಗೂ ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು. ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲ, ಸಹಕಾರದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದೆ ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಶಿಲ್ಪಾ ಮಾಧವ ಅವರು ಎರಡು ದಶಕಗಳಿಂದ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದರು. ಕಳೆದ ಶನಿವಾರ ಅಪರಾಹ್ನ ತಾನು ಕೆಲಸ ಮಾಡುತ್ತಿದ್ದ ಮರವಂತೆ ಸರಕಾರಿ ಪ್ರೌಢ ಶಾಲೆಯಿಂದ ಸ್ಕೂಟರ್ನಲ್ಲಿ ಮನೆಗೆ ಬರುತ್ತಿದ್ದಾಗ ಅಪಘಾತ ನಡೆದಿತ್ತು . ಮರವಂತೆ ಸಮೀಪವೇ ಕಾರೊಂದು ಅವರ ಇಲೆಕ್ಟ್ರಿಕ್ ಸ್ಕೂಟರ್ಗೆ ಢಿಕ್ಕಿ ಹೊಡೆದಿತ್ತು . ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಕಾರಿನ ಚಾಲಕ ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅವರನ್ನು ಮಣಿಪಾಲಕ್ಕೆ ವರ್ಗಾಯಿಸಲಾಗಿತ್ತು . ಶಿಲ್ಪಾ ಮಾಧವ ಅವರು ಸಮಾಜ ಸೇವಕ ಪತಿ ಪ್ರಸನ್ನ ಕುಮಾರ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.