ಉಡುಪಿ : ಭದ್ರಾವತಿಯನ ಚೆನ್ನಗಿರಿಯಲ್ಲಿ ರಸ್ತೆ ಅಪಘಾತಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾದ 21 ವರ್ಷ ಪ್ರಾಯದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೆದುಳು ನಿಷ್ಕ್ರೀಯಗೊಂಡ ಕಾರಣ ಕುಟುಂಬದವರು ಆತನ ಅಂಗಾಂಗ ದಾನಕ್ಕೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಏಳುಮಂದಿ ರೋಗಿಗಳ ಜೀವ ಉಳಿಸಲು ಸಹಾಯವಾಗಿದೆ.
21 ವರ್ಷ ಪ್ರಾಯದ ಉಲ್ಲಾಸ್ ಆರ್ ಎಂಬವರು ಎ.22ರ ಅಪರಾಹ್ನ 3:00 ಗಂಟೆ ಸುಮಾರಿಗೆ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ ಅಪಘಾತಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮದ ನೀರಗುಂಡಿ ಅಂಚೆ ರಾಜಪ್ಪ ಎಂಬವರ ಮಗನಾದ ಉಲ್ಲಾಸ್ ಅಪಘಾತದಿಂದ ತೀವ್ರವಾಗಿ ಗಾಯವಾಗಿದ್ದು ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಉಲ್ಲಾಸ್ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇದರಿಂದ ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ಉಲ್ಲಾಸ್ ಅವರನ್ನು ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.
ಬಳಿಕ ಉಲ್ಲಾಸ್ ಅವರ ತಂದೆ ರಾಜಪ್ಪ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯ ವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಹೃದಯ, ಶ್ವಾಸಕೋಶಗಳು, ಮೂತ್ರ ಪಿಂಡಗಳು, ಯಕೃತ್ತು ಮತ್ತು ಎರಡು ಕಾರ್ನಿಯಾಗಳು ಒಟ್ಟು 7ಮಂದಿ ರೋಗಿಗಳ ಜೀವ ಉಳಿಸಲು ಸಹಾಯವಾಯಿತು. ಜೀವನ ಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ಶ್ವಾಸಕೋಶಗಳನ್ನು ಅಪೊಲೊ ಆಸ್ಪತ್ರೆ ಚೆನ್ನೈ , ಯಕೃತ್ನ್ನು ಬೆಂಗಳೂರಿನ ಅಸ್ಟರ್ ಸಿಎಂಐ ಆಸ್ಪತ್ರೆ , ಒಂದು ಮೂತ್ರಪಿಂಡವನ್ನು ಮಂಗಳೂರಿನ ಎ. ಜೆ. ಆಸ್ಪತ್ರೆ ಮತ್ತು ಎರಡು ಕಾರ್ನಿಯಾಗಳು ಹಾಗೂ ಒಂದು ಮೂತ್ರಪಿಂಡವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿರುವ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.
ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು ಎಂದು ಕೆಎಂಸಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.