ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅದಮಾರಿನ 98 ವರ್ಷ ಪೂರೈಸಿರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಿಂಬದಿಯ ಗೋಡೆಗೆ ಸಿಡಿಲು ಬಡಿದಿದ್ದು, ಸಿಡಿಲಿನ ಆಘಾತಕ್ಕೆ ವಿದ್ಯುತ್ ವಯರಿಂಗ್, ಸಿ ಸಿ ಕ್ಯಾಮರಾ, ಇನ್ವರ್ಟರ್, ಅಕ್ವಾ ಗಾರ್ಡ್ ಸಹಿತ ವಿದ್ಯು ತ್ ಉಪಕರಣಗಳಿಗೆ ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ನೀರಿನ ನಳ್ಳಿಗೆ ಹಾನಿ ಉಂಟಾಗಿ ಶಾಲೆಯಲ್ಲಿ ನೀರಿಲ್ಲದ ಪರಿಸ್ಥಿತಿ ಸೃಷ್ಠಿಯಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮಾಡದಂತ ಪರಿಸ್ಥಿತಿ ಎದುರಾಗಿದೆ.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ನಾರಾಯಣ ಶೆಟ್ಟಿಯವರು ದೂರ ವಾಣಿಯ ಮೂಲಕ ವಿದ್ಯಾಂಗ ಇಲಾಖಾಧಿಕಾರಿ ಶಂಕರ ಸುವರ್ಣರವರನ್ನು ಸಂಪರ್ಕಿಸಿ, ಸಮಗ್ರ ಮಾಹಿತಿ ನೀಡಿದರು. ಈ ಹಿನ್ನೆಲೆ ಅಧಿಕಾರಿಯವರು ಗುರುವಾರ ಶಾಲೆಗೆ ರಜೆ ಘೋಷಿಸಿದ್ದಾರೆ.
ಸ್ಥಳೀಯರಾದ ಸದಾನಂದ ಆಚಾರ್ಯರವರು ಮಕ್ಕ ಳನ್ನು ಅವರವರ ಮನೆಗೆ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಎಲ್ಲೂರು ಗ್ರಾಮಕರಣಿಕ ಸುನಿಲ್ ಭೇಟಿ ನೀಡಿ ನಷ್ಟದ ಅಂದಾಜನ್ನು ಕಾಪು ತಹಶೀಲ್ದಾರ್ ಅವರಿಗೆ ಕಳುಹಿಸಿದ್ದಾರೆ.