ಉಡುಪಿ: ಉಡುಪಿ ನಗರದ ವಾದಿರಾಜ ಕಾಂಪ್ಲೆಕ್ಸ್ನಲ್ಲಿರುವ ಗ್ಲೋಬಲ್ ಟೈಮ್ ಟ್ರೇಡರ್ಸ್ ಕಚೇರಿಯಲ್ಲಿ ಕಳೆದ ನಾಲ್ಕು ತಿಂಗಳುಗಳಿ0ದ ಷೇರು ಮಾರುಕಟ್ಟೆ ವ್ಯವಹಾರ ನಡೆಸುತಿದ್ದ ವ್ಯಕ್ತಿಯೊಬ್ಬರನ್ನು ಬಲಾತ್ಕಾರವಾಗಿ ಅಪಹರಿಸಿ, ಲಕ್ಷಾಂತರ ರೂ.ಗಳನ್ನು ದರೋಡೆಗೈದ ಮೂವರು ಆರೋಪಿಗಳನ್ನು ಬಂಧಿಸಿ, ಪೊಲೀಸರು ಪ್ರಕರಣವನ್ನು ಕೇವಲ ಮೂರು ದಿನಗಳಲ್ಲೇ ಬೇಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಂತೋಷ ಬೋವಿ, ಅನಿಲ್ ಪೂಜಾರಿ ಹಾಗೂ ಮಣಿಕಂಠ ಖಾರ್ವಿ ಎಂದು ಪೊಲೀಸರು ಗುರುತಿಸಿದ್ದು, ಇವರೆಲ್ಲರೂ ಕಾರ್ಕಳದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರೆಂದು ತಿಳಿದುಬಂದಿದೆ. ಇವರು ಈ ಹಿಂದೆ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಮೂವರು ಆರೋಪಿಗಳ ವಿರುದ್ಧ ಕಾಪು, ಕಾರ್ಕಳ ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಮೇಲೆ ಕಾಪು, ಕಾರ್ಕಳ ಗ್ರಾಮಾಂತರ, ಸುಬ್ರಮಣ್ಯ ಠಾಣೆ ಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಈ ಕೃತ್ಯದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಅವರುಗಳ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ಅವರ ಆದೇಶದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಸುಧಾಕರ ಸದಾನಂದ ನಾಯ್ಕ್ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್ ಪಿ, ಪಿಎಸ್ಐ ಅಶೋಕ್ ಕುಮಾರ್, ಅಪರಾಧ ಪಿಎಸ್ಐ ವಾಸಪ್ಪ ನಾಯ್ಕ್ ಅವರು ಸಿಬ್ಬಂದಿಗಳ ನೆರವಿನೊಂದಿಗೆ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದರು.