ಉಡುಪಿ: ಬೈಂದೂರು ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಮೇಲಿನ ಆಪಾದನೆಗಳು ಸಾಬೀತಾಗಿದ್ದು, ಆತನನ್ನು ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆರೋಪಿಯನ್ನು ಸುರೇಶ್ ಮರಾಠಿ (29 ವರ್ಷ) ಎನ್ನಲಾಗಿದೆ. ಈತನಿಗೆ 10 ವರ್ಷ ಸಜೆ, 20 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ ಆದೇಶಿಸಲಾಗಿದೆ. ಈತ ತನ್ನ ಹೆಂಡತಿಯ ತಂಗಿಯನ್ನು ಕಾಡಿಗೆ ಕರೆದೊಯ್ದು ಅಲ್ಲಿನ ಮರವೊಂದರ ಮೇಲೆ ಗುಡಿಸಲು ಸಿದ್ದಪಡಿಸಿ ಮೂರು ದಿನಗಳ ಕಾಲ ನಿರಂತರವಾಗಿ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ.
17 ವರ್ಷ ಪ್ರಾಯದ ಸಂತ್ರಸ್ತ ಯುವತಿ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಆರೋಪಿ ಸುರೇಶ್ ಮರಾಠಿಯನ್ನು ಬಂಧಿಸಿದ ಬಳಿಕ ವಿಚಾರಣೆಗಾಗಿ 2018ನೇ ಅಕ್ಟೋಬರ್ ನಲ್ಲಿ ಉಡುಪಿ ಫೋಕ್ಸೋ ನ್ಯಾಯಾಲಯದಿಂದ ಮರಳಿ ಕಾರಾವರ ಜೈಲಿಗೆ ಕರೆದೊಯ್ಯುತ್ತಿರುವಾಗ ಬೈಂದೂರು ರೈಲು ನಿಲ್ದಾಣದ ಬಳಿ ಆರೋಪಿ ತನಗೆ ವಾಂತಿ ಬರುತ್ತಿದೆಯೆಂಬ ನಾಟಕವಾಡಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬ0ಧಿಸಿ ಕರ್ತವ್ಯಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿತ್ತು. ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆತ ಕಳೆದ ಆರೇಳು ತಿಂಗಳ ಹಿಂದೆ ನ್ಯಾಯಾಲಯಕ್ಕೆ ಶರಣಾಗತನಾಗಿದ್ದ ಎಂದು ತಿಳಿದು ಬಂದಿದೆ.