ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ಅವರು ನಿಧನ ಹೊಂದಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು.18-05-2022ರಂದು ನಿಧನರಾದರು
ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ ಆಕರ್ಷಿತರಾದ ಕೊರಗಪ್ಪ ನಾಯ್ಕರು ಭಾಗವತಿಕೆಯಲ್ಲಿಯೂ ಬಲಿಪ ಶೈಲಿಯ ಪ್ರತಿನಿಧಿಯಾಗಿದ್ದರು. ಕಟೀಲು ಒಂದೇ ಮೇಳವಾಗಿದ್ದಾಗ ಸಂಗೀತಗಾರರಾಗಿ ಸೇರಿದ ಕೊರಗಪ್ಪ ನಾಯ್ಕರು ದೀರ್ಘಕಾಲ ಇರಾ ಗೋಪಾಲಕೃಷ್ಣ ಕುಂಡೆಚ್ಚ ಭಾಗವತರಿಗೆ ಸಹಾಯಕ ಭಾಗವತರಾಗಿ ಸೇವೆಸಲ್ಲಿಸಿದ್ದರು ಎಂದು ತಿಳಿಯಲಾಗಿದೆ.
ಮುಖ್ಯ ಮದ್ದಲೆಗಾರರಾಗಿದ್ದ ನಿಡ್ಲೆ ನರಸಿಂಹ ಭಟ್ಟರು, ಅಡೂರು ಕೃಷ್ಣ ಮದ್ಲೆಗಾರರು, ಅಡೂರು ಸುಂದರ ರಾಯರಂಥವರ ಜತೆಗೆ ಒಡನಾಟ ಹೊಂದಿದ್ದರು. 70-90 ರ ದಶಕಗಳಲ್ಲಿ ಕದ್ರಿ ವಿಷ್ಣು, ಕುಂಬಳೆ ಕುಟ್ಯಪ್ಪು, ಪಡ್ರೆ ಚಂದು, ಕುಂಞಿ ಕಣ್ಣ ಮಣಿಯಾಣಿ, ಪುತ್ತೂರು ಕೃಷ್ಣ ಭಟ್ಟ, ಸಂಪಾಜೆ ಶೀನಪ್ಪ ರೈ, ಮುಂದಿಲ ಕೃಷ್ಣ ಭಟ್ಟ, ಕೋಡಿ ಕುಷ್ಟ , ಅಜಾರು ಉಮೇಶ ಶೆಟ್ಟಿ, ಮುಂಡ್ಕೂರು ಕುಟ್ಟಿ ಶೆಟ್ಟಿ ಮೊದಲಾದವರನ್ನು ಕುಣಿಸಿದ್ದರು. ತಿರುಗಾಟದ ಕೊನೆಯಲ್ಲಿ ಕುಬಣೂರು ಶ್ರೀಧರ ರಾಯರಿಗೆ ಸಹಾಯಕ ಭಾಗವತರಾಗಿದ್ದರು, ಮದ್ದಲೆ ವಾದನವನ್ನೂ ಅರಿತಿದ್ದರು. ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.