ಕಡಬ: ಎರಡು ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಏಳು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಶನಿವಾರದಂದು ನಡೆದಿದೆ.

ಮಾರುತಿ ಎರ್ಟಿಗಾ ಕಾರು ಹಾಗೂ ಮಾರುತಿ ಓಮ್ಮಿ ಕಾರುಗಳ ಈ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಬೆಂಗಳೂರು ಮೂಲದ ಕುಟುಂಬವು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ನೆಟ್ಟಣ (ಸುಬ್ರಮಣ್ಯ ರೋಡ್) ಬಳಿ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ನಡುವೆ ಢಿಕ್ಕಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ.ಅಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಕಾರಿನಲ್ಲಿದ ಪ್ರಯಾಣಿಕರು ಕರಾವಳಿ ಕರ್ನಾಟಕದ ಎರಡು ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲು ಆಗಮಿಸಿದ್ದರು. ಓಮ್ಮಿ ಕಾರಿನಲ್ಲಿದ್ದ ಪ್ರಯಾಣಿಕರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನವರೆಂದು ತಿಳಿದುಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









