ಕಾರ್ಕಳ: ಮಾರುತಿ ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಹಸುಗಳನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಹಿಂದೂ ಕಾರ್ಯಕರ್ತರ ಕಾರ್ಯಾಚರಣೆಗೆ ಬೆಚ್ಚಿದ ಗೋ ಕಳ್ಳರು ಕಾರು ಬಿಟ್ಟು ಪರಾರಿಯಾಗಿದ್ದಾರೆ.
ಸೆ.19ರಂದು ಸಾಯಂಕಾಲ ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಸಭೆ ನಡೆದ ಕೆಲವೇ ಗಂಟೆಯಲ್ಲಿ ಈ ಕೃತ್ಯ ನಡೆದಿದೆ. ಕಾರ್ಯಕರ್ತರು ಪ್ರತಿಭಟನಾ ಸಭೆ ಮುಗಿಸಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಸಿಕ್ಕಿತ್ತು. ಇದನ್ನು ಬೆನ್ನತ್ತಿದ ಕಾರ್ಯಕರ್ತರು ಕಾರನ್ನು ಹಿಂಬಾಲಿಸಿದ್ದಾರೆ. ಗೋಕಳ್ಳರು ಕೆರ್ವಾಶೆ ಕಡೆಗೆ ಹೋಗುತ್ತಿದ್ದು, ಬಳಿಕ ಅಲ್ಲಿಯೇ ರಸ್ತೆಯ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು, ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಹೋಗಿ ಪರಿಶೀಲಿಸಿದ ಕಾರ್ಯಕರ್ತರಿಗೆ ಕಾರಿನಲ್ಲಿ ಹಿಂಸಾತ್ಮಕವಾಗಿ ಎರಡು ದನಗಳನ್ನು ಕಟ್ಟಿರುವುದು ಗೊತ್ತಾಗಿದೆ. ಎರಡು ದನಗಳನ್ನು ಕಾರ್ಯಕರ್ತರು ರಕ್ಷಿಸಿದ್ದಾರೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸೆ.20ರ ಹತ್ತು ಗಂಟೆಯ ಒಳಗೆ ಆರೋಪಿಗಳನ್ನು ಬಂಧಿಸಬೇಕೆಂದು ಹಿಂದೂ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಬಂಧಿಸದಿದ್ದರೇ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.