ನವದೆಹಲಿ: ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು, ಈಗಿರುವ ಸ್ಥಿತಿಗತಿ ಪರಿಶೀಲನೆಗಾಗಿ ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೇರಿ ತಿರುವನಂತಪುರದಲ್ಲಿ ಸಭೆ ನಡೆಸಿದ್ದಾರೆ.
ಸದ್ಯ ದಕ್ಷಿಣ ಭಾರತದ ರಾಜ್ಯಗಳಲ್ಲೇ ಅತ್ಯಂತ ಹೆಚ್ಚು ಕೊರೊನಾ ಕೇಸ್ ಗಳು ದಾಖಲಾಗುತ್ತಿರುವುದು ಕೇರಳದಲ್ಲಿ. ಇತ್ತೀಚೆಗೆ ಕೇಂದ್ರದಿಂದ ನುರಿತ ತಜ್ಞರ ತಂಡವೊಂದನ್ನು ಕೇರಳಕ್ಕೆ ಕಳಿಸಲಾಗಿತ್ತು. ನಿನ್ನೆ ಬೆಳಗ್ಗೆ ಸ್ವತಃ ಕೇಂದ್ರ ಆರೋಗ್ಯ ಸಚಿವರೇ ಅಲ್ಲಿಗೆ ಆಗಮಿಸಿ, ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ್ದಾರೆ.
ತುರ್ತು ಕೊವಿಡ್ ಪ್ರತಿಕ್ರಿಯಾ ಪ್ಯಾಕೇಜ್-2ರ ಅಡಿ ಕೇರಳಕ್ಕೆ 267.35 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು ಎಂದು ಸಭೆಯ ವೇಳೆ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದರೊಂದಿಗೆ, ಕೇರಳದ ಎಲ್ಲ ಜಿಲ್ಲೆಗಳಲ್ಲಿ ಔಷಧಗಳ ಲಭ್ಯತೆ ಪ್ರಮಾಣ ಹೆಚ್ಚಿಸಲು ಹೆಚ್ಚುವರಿಯಾಗಿ ಒಂದು ಕೋಟಿ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ. ಅಷ್ಟೇ ಅಲ್ಲ, ಕೇರಳದ ಪ್ರತಿ ಜಿಲ್ಲೆಯಲ್ಲೂ ಟೆಲಿಮೆಡಿಸಿನ್ ವ್ಯವಸ್ಥೆ ರೂಪಿಸಲೂ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಇನ್ನು ಮಕ್ಕಳ ಆರೋಗ್ಯವನ್ನೂ ಆದ್ಯತೆಯನ್ನಾಗಿಸಲಾಗಿದೆ. ಪ್ರತಿ ಜಿಲ್ಲಾಸ್ಪತ್ರೆಗಳಲ್ಲೂ 10 ಕೆಎಲ್ ಲಿಕ್ವಿಡ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯವಿರುವ ಮಕ್ಕಳ ಐಸಿಯು ಸ್ಥಾಪಿಸಲೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕೇಂದ್ರ ಆರೋಗ್ಯ ಸಚಿವರು ನಡೆಸಿದ ಸಭೆಯಲ್ಲಿ ಕಾಯಿಲೆ ನಿಯಂತ್ರಣಾ ರಾಷ್ಟ್ರೀಯ ಕೇಂದ್ರದ ಮುಖ್ಯಸ್ಥ ಡಾ. ಸುಜೀತ್ ಕೆ ಸಿಂಗ್ ಮತ್ತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೂಡ ಹಾಜರಿದ್ದರು. ಇಂದು ಮನ್ಸುಖ್ ಮಾಂಡವಿಯಾ ಅಸ್ಸಾಂನ ಗುವಾಹಟಿಯಲ್ಲಿ ಕೊರೊನಾ ಸ್ಥಿತಿಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಈಶಾನ್ಯ ರಾಜ್ಯಗಳ ಎಲ್ಲ ಆರೋಗ್ಯ ಸಚಿವರುಗಳೂ ಇರಲಿದ್ದಾರೆ.