ದೆಹಲಿ: ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 13) ಮಹತ್ವದ ಸಭೆ ನಡೆಸಿದ್ದಾರೆ. ಅನಿಯಂತ್ರಿತ ಕ್ರಿಪ್ಟೋ ಕರೆನ್ಸಿ ಮಾರ್ಕೆಟ್ನಿಂದ ಆಗುವ ಪರಿಣಾಮ, ಕ್ರಿಪ್ಟೋ ಕರೆನ್ಸಿ ಮೂಲಕ ಅಕ್ರಮ ಹಣದ ವಹಿವಾಟು ಹಾಗೂ ಉಗ್ರರಿಗೆ ಹಣ ಒದಗಿಸುವ ಮಾರ್ಗ ಬಂದ್ ಬಗ್ಗೆ ಚರ್ಚೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಸಂಬಂಧ ಅಪಾಯ ಎದುರಾಗುವ ಮುನ್ನ ಎಚ್ಚೆತ್ತುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ.
ಕ್ರಿಪ್ಟೋ ಕರೆನ್ಸಿ ವಹಿವಾಟು ಬಗ್ಗೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಡಲಿದೆ. ತಜ್ಞರ ಜತೆ ನಿರಂತರ ಸಂಪರ್ಕದಲ್ಲಿದ್ದು ವಹಿವಾಟಿನ ಬಗ್ಗೆ ನಿಗಾ ವಹಿಸಲಾಗುವ ಬಗ್ಗೆ ಚರ್ಚೆ ಮಾಡಲಾಗಿದೆ. ಕ್ರಿಪ್ಟೋ ಕರೆನ್ಸಿ ವಹಿವಾಟು ದೇಶದ ಗಡಿ ಮೀರಿದ ವ್ಯವಸ್ಥೆ ಆಗಿದೆ. ಇದಕ್ಕೆ ಜಾಗತಿಕ, ಸಾಮೂಹಿಕ ಕಾರ್ಯತಂತ್ರಗಳ ಅಗತ್ಯ ಇದೆ. ಈ ಬಗ್ಗೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಮಹತ್ವದ ಚರ್ಚೆ ಮಾಡಲಾಗಿದೆ.
ಆರ್ಬಿಐ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು, ಕೇಂದ್ರ ಗೃಹ ಇಲಾಖೆ ಹಿರಿಯ ಅಧಿಕಾರಿಗಳು, ತಜ್ಞರ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಮೋದಿ ಸಭೆ ಮಾಡಿದ್ದಾರೆ.