ತೆಲುಗಿನ ಖ್ಯಾತ ನಟ ನಂದಮೂರಿ ತಾರಕರತ್ನ ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ನಾರಾಯಣ ಹೃದಯಾಲಯದಲ್ಲಿ ಕಳೆದ 23 ದಿನಗಳಿಂದ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ನಂದಮೂರಿ ತಾರಕರತ್ನ ವರಿಗೆ 39 ವರ್ಷ ವಯಸ್ಸಾಗಿತ್ತು. ಆಂಧ್ರಪ್ರದೇಶದ ಕುಪ್ಪಂನಲ್ಲಿ ಜನವರಿ 27 ರಂದು ನಾರಾ ಲೋಕೇಶ್ ನೇತೃತ್ವದಲ್ಲಿ ನಡೆಯುತ್ತಿದ್ದ ಪಾದಯಾತ್ರೆಯಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ದಾಖಲಿಸಲಾಗಿತ್ತು.
ನಂದಮೂರಿ ತಾರಕ ರತ್ನ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂಭಾಗ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ನಂದಮೂರಿ ಮೋಹನ ಕೃಷ್ಣ ಅವರ ಪುತ್ರರಾದ ತಾರಕರತ್ನ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ. ರಾಮರಾವ್ ಅವರ ಮೊಮ್ಮಗ. ಜ್ಯೂನಿಯರ್ ಎನ್ ಟಿಆರ್ ಅವರ ಸೋದರ ಸಂಬಂಧಿಯಾಗಿದ್ದು, ತಾರಕ್, ಯುವರತ್ನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.