


ಬೆಂಗಳೂರು: ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂಬ ಕಾರಣದಿಂದ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ (30) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು ವರ್ಷದ ಹಿಂದೆ ಮದುವೆಯಾಗಿದ್ದ ನಂದಿನಿಗೆ ಇಬ್ಬರು ಮಕ್ಕಳಿದ್ದು, ಪತಿ ಸೆಲೂನ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೊರಟಿದ್ದ ಪತಿಯ ಬಳಿ ಚಾಕೋಲೇಟ್ ತಂದು ಕೊಡುವಂತೆ ನಂದಿನಿ ಕೇಳಿದ್ದರಂತೆ. ಆದರೆ ಮಧ್ಯಾಹ್ನ ಕಳೆದರೂ ಪತಿ ಚಾಕೊಲೇಟ್ ತಂದು ಕೊಡದೆ ಇದ್ದಾಗ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಇತ್ತ ನಂದಿನಿ ಪತಿ ಮಧ್ಯಾಹ್ನ ಕರೆ ಮಾಡಿದಾಗ ಫೋನ್ ಸ್ವೀಕರಿಸದೆ ಇದ್ದಾಗ ಅನುಮಾನಗೊಂಡಿದ್ದಾರೆ. ಮನೆಗೆ ಬಂದು ನೋಡಿದಾಗ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ. ನಂದಿನಿ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸುಂದರ ಸಂಸಾರದಲ್ಲಿ ನಂದಿನಿಯ ದುಡುಕಿನ ನಿರ್ಧಾರದಿಂದ ಮಕ್ಕಳು ತಾಯಿ ಇಲ್ಲದ ತಬ್ಬಲಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಣ್ಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಾವಿಗೆ ಚಾಕೊಲೇಟ್ ತಂದು ಕೊಡದೆ ಇದ್ದುದೇ ಕಾರಣವೇ ಅಥವಾ ಬೇರೆ ಏನಾದರೂ ಕಾರಣಗಳಿವೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.