Thursday, March 28, 2024
spot_imgspot_img
spot_imgspot_img

ಗುಜರಾತ್​ನ 89 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಚುನಾವಣೆ

- Advertisement -G L Acharya panikkar
- Advertisement -

ಗುಜರಾತ್‌ನ ಒಟ್ಟು 182 ಸ್ಥಾನಗಳ ಪೈಕಿ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಅಂತ್ಯಗೊಂಡಿದೆ. ಡಿಸೆಂಬರ್ 1 ರಂದು ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ 1 ನೇ ಹಂತದ ಚುನಾಚಣೆ ನಡೆಯಲಿದೆ. ಸಾಂಪ್ರದಾಯಿಕವಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಕಾಂಗ್ರೆಸ್ ಪೈಪೋಟಿ ನಡೆಸುತ್ತಿತ್ತು. ಆದರೆ ಈ ಬಾರಿ ಪಂಜಾಬ್​ನಲ್ಲಿ ಜಯಭೇರಿ ಸಾಧಿಸಿದ ಹುಮ್ಮಸ್ಸಿನಲ್ಲಿಯೇ ಆಮ್ ಆದ್ಮಿ ಪಕ್ಷ (AAP) ಗುಜರಾತ್​ನಲ್ಲಿ ಅಬ್ಬರದ ಪ್ರಚಾರ ನಡೆಸಿ ಬಿಜೆಪಿಗೆ ಮತ್ತೊಂದು ಪ್ರಬಲ ಪಕ್ಷವಾಗಿ ಎದುರು ನಿಂತಿದೆ.

ರಾಜ್ಯದಲ್ಲಿ ಒಟ್ಟು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಡಿಸೆಂಬರ್ 1 ರಂದು (ಗುರುವಾರ) 89 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್ ವಿಧಾನಸಭಾ ಚುನಾವಣೆ 1 ನೇ ಹಂತವು ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಮೊದಲ ಹಂತದ ವ್ಯಾಪ್ತಿಯಲ್ಲಿ ಒಟ್ಟು 2,39,76,670 ಮತದಾರರು ನೋಂದಣಿಯಾಗಿದ್ದಾರೆ. ಇದರಲ್ಲಿ 1,24,33,362 ಪುರುಷರು, 1,15,42,811 ಮಹಿಳೆಯರು ಮತ್ತು 497 ತೃತೀಯಲಿಂಗಿ ಮತದಾರರಿದ್ದಾರೆ. ರಾಜ್ಯದಲ್ಲಿ ಒಟ್ಟು 4,91,35,400 ಮತದಾರರು ನೋಂದಣಿಯಾಗಿದ್ದಾರೆ.

39 ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳಿಂದ ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 25,430 ಮತಗಟ್ಟೆಗಳಿದ್ದು, ಈ ಪೈಕಿ 16,416 ಗ್ರಾಮೀಣ ಪ್ರದೇಶದಲ್ಲಿ ಮತ್ತು 9,014 ಮತಗಟ್ಟೆಗಳು ನಗರ ಪ್ರದೇಶಗಳಲ್ಲಿವೆ. ಮೊದಲ ಹಂತದ ಚುನಾವಣೆಗೆ, ಒಟ್ಟು 34,324 ಬ್ಯಾಲೆಟ್ ಯೂನಿಟ್‌ಗಳು, 34,324 ಕಂಟ್ರೋಲ್ ಯೂನಿಟ್‌ಗಳು ಮತ್ತು 38,749 ವಿವಿಪ್ಯಾಟ್‌ಗಳನ್ನು (ಮತದಾರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರಯಲ್) ಬಳಸಲಾಗುತ್ತಿದೆ.

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಪ್ರಚಾರ ಮಂಗಳವಾರ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದೆ. ತನ್ನ ಪ್ರಚಾರದ ಕೊನೆಯ ಹಂತದಲ್ಲಿ ಆಡಳಿತಾರೂಢ ಬಿಜೆಪಿ ಒಂದು ದಿನದಲ್ಲಿ ಅನೇಕ ಸಾರ್ವಜನಿಕ ಸಭೆಗಳನ್ನು ನಡೆಸಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸೇರಿದಂತೆ ಹಲವು ಪ್ರಮುಖ ನಾಯಕರು ರಾಜ್ಯದಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದರು.

ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಪಕ್ಷದ ಪರ ಪ್ರಚಾರ ನಡೆಸಿದರು. ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ದ್ವಿಧ್ರುವಿ ಸ್ಪರ್ಧೆಗೆ ಸಾಕ್ಷಿಯಾಗಿರುವ ರಾಜ್ಯವು ಈ ಬಾರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ರೂಪದಲ್ಲಿ ಮೂರನೇ ಆಟಗಾರನನ್ನು ಹೊಂದಿದೆ. ಕೇಜ್ರಿವಾಲ್ ಜುಲೈನಿಂದ ಐದು ತಿಂಗಳೊಳಗೆ ಇಡೀ ರಾಜ್ಯದಲ್ಲಿ ಬೃಹತ್ ಪ್ರಚಾರವನ್ನು ನಡೆಸಿದ್ದಾರೆ.

- Advertisement -

Related news

error: Content is protected !!