ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜ.18ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ.
ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಈ ವಿಷಯ ತಿಳಿಸಿದ್ದು, ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.
ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ತಿಳಿಸಲಾಗಿದೆ.
ಆದರೆ ಉದ್ವೇಗದಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.