ಬೆಂಗಳೂರು: ‘ರಾಜ್ಯದ ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯನ್ನು ಶೀಘ್ರದಲ್ಲಿ ನೀಡಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲಾಖೆ ಈ ಉದ್ದೇಶಕ್ಕಾಗಿ ₹ 7 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲು ಪ್ರಕ್ರಿಯೆ ಆರಂಭಿಸಿದೆ’ ಎಂದರು.
‘ಕೈದಿಗಳ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳಲು ಅನುಕೂಲ ಆಗುವಂತೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗೆ ಪೂರಕವಾಗಿ ಯೋಜನೆಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ. ಆ ಮೂಲಕ ಕೇಂದ್ರ ಕಾರಾಗೃಹಗಳಲ್ಲಿ ಬಂಧಿಯಾಗಿರುವ ಮಾನವ ಸಂಪನ್ಮೂಲವನ್ನು ರಾಷ್ಟ್ರೀಯ ಸಂಪನ್ಮೂಲವನ್ನಾಗಿ ಪರಿವರ್ತಿಸುವ ಉದ್ದೇಶಿಸಲಾಗಿದೆ’ ಎಂದು ಸಚಿವರು ಹೇಳಿದರು.
ಕಾರಾಗೃಹಗಳಲ್ಲಿ ನೇಯ್ಗೆ, ಮರಗೆಲಸ, ಬೇಕರಿ, ಜಮಖಾನ, ಶಾಮಿಯಾನ, ಸಾಬೂನು ಮುಂತಾದ ಕೈಗಾರಿಕ ಚಟುವಟಿಕೆ ಸದ್ಯ ನಡೆಯುತ್ತಿದೆ ಹಾಲಿ ಇರುವ ಯಂತ್ರೋಪಕರಣಗಳ ಉನ್ನತೀಕರಣ, ಕೈದಿಗಳಿಗೆ ವೃತ್ತಿ ನೈಪುಣ್ಯತೆ ಸೇರಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ’ ಎಂದೂ ಸಚಿವರು ವಿವರಿಸಿದರು.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ರಾಜ್ಯ ಕಾರಾಗೃಹಗಳ ಡಿಜಿ ಅಲೋಕ್ ಮೋಹನ್, ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಇಲಾಖೆ) ರಜನೀಶ್ ಗೋಯಲ್ ಇದ್ದರು.