ವೈದ್ಯರ ನಿರ್ಲಕ್ಷ್ಯದಿಂದ ಐದು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ತನು (5) ಮೃತ ಬಾಲಕಿ.
ವೆಂಕಟೇಗೌಡನ ಪಾಳ್ಯದ ನಿವಾಸಿ ಸತೀಶ್ ಹಾಗೂ ಶಿಲ್ಪಾ ದಂಪತಿ ಪುತ್ರಿ ತನುಗೆ ರಾತ್ರಿ ಇದ್ದಕ್ಕಿದ್ದಂತೆ ಜ್ವರ ಕಾಣಿಸಿಕೊಂಡಿದೆ. ಕೂಡಲೇ ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪಾಲಕರು ಕರೆದೊಯ್ದಿದ್ದ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗಿಲ್ಲ. ನರ್ಸ್ ಮಗುವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಹಿನ್ನೆಲೆ ಖಾಸಗಿ ವಾಹನದಲ್ಲಿ ಗುಬ್ಬಿಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.
ಸಿ.ಎಸ್.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇದ್ದಿದ್ದರೆ ನಮ್ಮ ಮಗು ಸಾವನ್ನಪ್ಪುತ್ತಿರಲಿಲ್ಲ. ಇದು 24×7 ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ನಮ್ಮ ಮಗು ಸಾವನ್ನಪ್ಪಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಮೃತಪಡುತ್ತಿರಲಿಲ್ಲ. ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.