ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ 8 ಹಾಗೂ ಗೋಪಾಲ್ಗಂಜ್ ಜಿಲ್ಲೆಯಲ್ಲಿ 16 ಸೇರಿದಂತೆ ಒಟ್ಟು 24 ಮಂದಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟಿದ್ದಾರೆ. ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ಬಿಹಾರದಲ್ಲಿ ಸಂಪೂರ್ಣ ಪಾನನಿಷೇಧ ಜಾರಿಯಲ್ಲಿದ್ದರೂ ಈ ದುರ್ಘಟನೆ ನಡೆದಿದೆ.
ಪಶ್ಚಿಮ ಚಂಪಾರಣ್ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಬೆಟ್ಟಯಾ ಸಮೀಪದ ತೆಲ್ಹುವಾ ಗ್ರಾಮದಲ್ಲಿ ಎಂಟು ಮಂದಿ ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪಿದ್ದಾರೆ. ಗೋಪಾಲ್ಗಂಜ್ನಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಸತ್ತವರ ಸಂಖ್ಯೆಯು 16ಕ್ಕೆ ಮುಟ್ಟಿದೆ. ಸತ್ತವರ ಸಂಖ್ಯೆಯನ್ನು ಜಿಲ್ಲಾಡಳಿತ ದೃಢಪಡಿಸಿದೆ. ಎರಡೂ ಜಿಲ್ಲಾಡಳಿತಗಳು ಸಾವಿನ ಕಾರಣವನ್ನು ದೃಢಪಡಿಸಿಲ್ಲ.
ಗೋಪಾಲ್ಗಂಜ್ಗೆ ಸಚಿವ ಜನಕ್ ರಾಮ್ ಧಾವಿಸಿದ್ದಾರೆ. ‘ನಾನು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತನಾಡಿದೆ. ಅವರು ಕಳ್ಳಬಟ್ಟಿ ಸೇವಿಸಿ ಸಾವನ್ನಪ್ಪಿದ್ದಾರೆ ಎನ್ನಲು ಯಾವುದೇ ಆಧಾರವಿಲ್ಲ. ಎನ್ಡಿಎ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ನಡೆಯುತ್ತಿರುವ ಷಡ್ಯಂತ್ರ ಇದಾಗಿರಬಹುದು ಎಂದು ಅವರು ಪ್ರತಿಕ್ರಿಯಿಸಿದರು. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ಸರ್ಕಾರವು ಮದ್ಯ ನಿಷೇಧವನ್ನು ಸರಿಯಾಗಿ ಜಾರಿಗೆ ತರುವಲ್ಲಿ ವಿಫಲವಾಗಿದೆ. ಮರಣೋತ್ತರ ಪರೀಕ್ಷೆಗೆ ಮೊದಲೇ ಪೊಲೀಸರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಅವಕಾಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಈ ದುರಂತದ ಹೊಣೆ ಹೊರಬೇಕು ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸರ್ಕಾರವನ್ನು ಟೀಕಿಸಿದ್ದಾರೆ.