ಎರ್ನಾಕುಲಂ (ಕೇರಳ): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಯಕರನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಮುಂಜಾನೆ ಕೇರಳದಾದ್ಯಂತ 28 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದೆ.
ನಿಷೇಧಿತ ಪಿಎಫ್ಐ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಮರುಸಂಘಟಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರ್ನಾಕುಲಂನಲ್ಲಿ ನಿಷೇಧಿತ ಪಿಎಫ್ಐ ಮುಖಂಡರಿಗೆ ಸಂಬಂಧಿಸಿದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ತಿರುವನಂತಪುರಂನಲ್ಲಿ ಆರು ಸ್ಥಳಗಳ ಮೇಲೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ದಾಳಿ ನಡೆದಿದ್ದು ತೀವ್ರ ಶೋಧ ಕಾರ್ಯ ಮುಂದುವರೆದಿದೆ.
2006ರಲ್ಲಿ ಕೇರಳದಲ್ಲಿ ಪಿಎಫ್ಐ ಸಂಘಟನೆಯನ್ನು ಸ್ಥಾಪಿಸಲಾಗಿದ್ದು, ಬಳಿಕ ಅದು 2009ರಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿತು. ನಂತರ ದೇಶದ ವಿವಿಧ ಭಾಗಗಳಿಗೆ ತನ್ನ ಕಬಂಧ ಬಾಹುಗಳನ್ನು ಹರಡಿದ ಕೇರಳ ಮೂಲದ ಮೂಲಭೂತವಾದಿ ಸಂಘಟನೆಯನ್ನು ಕೇಂದ್ರ ಸರ್ಕಾರವು ಈ ವರ್ಷದ ಸೆಪ್ಟೆಂಬರ್ ನಲ್ಲಿ ನಿಷೇಧಿಸಿತ್ತು . ಪಿಎಫ್ಐ ನಿಷೇಧದ ಬಳಿಕ ಅದರಲ್ಲಿ ಸಕ್ರಿಯರಾಗಿದ್ದ ಕಾರ್ಯಕರ್ತರನ್ನು ಬದಲಿ ಸಂಘಟನೆ ಸ್ಥಾಪಿಸಿ ಮತ್ತೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುವ ಮಾಹಿತಿ ಕಲೆ ಹಾಕಿದ ಎನ್ಐಎ ದಾಳಿ ನಡೆಸಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ.