ನವದೆಹಲಿ: ಈ ಹೊಸ ವರ್ಷದ ಮೊದಲ ದಿನವೇ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತಿನ ಹಣ 2022ರ ಜನವರಿ 1ರಂದು ಬಿಡುಗಡೆಯಾಗಲಿದೆ. ಹೊಸ ವರ್ಷದ ದಿನದಂದು 10 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಗುವುದು. ಇದುವರೆಗೂ 1.6 ಲಕ್ಷ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದೀಗ ಜನವರಿ 1ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು.
ಈ ನಿಟ್ಟಿನಲ್ಲಿ ಫಲಾನುಭವಿ ರೈತರಿಗೆ ಸಂದೇಶದ ಮೂಲಕ ಮಾಹಿತಿ ನೀಡಲಾಗಿದೆ. ಸಂದೇಶದ ಪ್ರಕಾರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಂತುಗಳನ್ನು 2022ರ ಜನವರಿ 1ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ದೇಶಾದ್ಯಂತ ಕೋಟ್ಯಂತರ ರೈತರಿಗೆ ವಾರ್ಷಿಕ 6 ಸಾವಿರ ರೂ. ಹಣವನ್ನು ಆನ್ಲೈನ್ನಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.
ಜನವರಿ 1 ರಂದು ಪ್ರಧಾನಿ ಮೋದಿ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ರೈತರಿಗೆ ಕಳುಹಿಸಿದ ಸಂದೇಶದಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 1, 2022 ರಂದು ಮಧ್ಯಾಹ್ನ 12 ಗಂಟೆಗೆ ಪಿಎಂ ಕಿಸಾನ್ ಯೋಜನೆಯಡಿ 10 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡುತ್ತಾರೆ. ಈ ದಿನ ಪ್ರಧಾನಿ ಮೋದಿ ಅವರು ರೈತ ಉತ್ಪಾದಕ ಸಂಸ್ಥೆಗಳಿಗೆ ಇಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ರೈತರು pmindiawebcast.nic.in ಅಥವಾ ದೂರದರ್ಶನದ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದು.
ಭಾರತದ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ವರ್ಗಾಯಿಸಲಾಗುವುದು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ. ಆರ್ಥಿಕ ಪ್ರಯೋಜನವನ್ನು ಒದಗಿಸಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಇದುವರೆಗೆ ಈ ಯೋಜನೆಯಡಿ 1.6 ಲಕ್ಷ ಕೋಟಿ ರೂ. ಹಣವನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.