ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ನಡೆದಿದೆ. ಈ ಘಟನೆ ಈಶ್ವರಮಂಗಲ ಪೇಟೆಯ ಜಂಕ್ಷನ್ ನಲ್ಲಿ ನಡೆದಿದೆ. ಈ ಕುರಿತಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ನಿರ್ವಾಹಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಸುಖರಾಜ್ ರೈ ಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪುತ್ತೂರು ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ್ ಶೆಟ್ಟಿ ಅವರು “ನಿನ್ನೆ ಸಂಜೆಯೇ ಈ ಘಟನೆ ನಮ್ಮ ಗಮನಕ್ಕೆ ಬಂದಿದ್ದು ರಾತ್ರಿ ಆದ್ದರಿಂದಲೇ ನಮಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ, ಇಂದು ಇಂದು ಬೆಳಿಗ್ಗೆಯೇ ಈ ರೀತಿ ಹಲ್ಲೆ ಮಾಡಿದ ರಾಜ್ಯ ಸಾರಿಗೆ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂಬ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.
ಕೆಎ 21 ಎಫ್ 0002 ನಂಬರ್ನ ಬಸ್ ನಿರ್ವಾಹಕ ಪ್ರಯಾಣಿಕನಿಗೆ ಕಾಲಿನಿಂದ ತುಳಿದು ಹೊರಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದು ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆ ಎಸೆಯುತ್ತಾರೆ. ಬಸ್ಸಿನಿಂದ ಕೆಳಗಿಳಿಸಲು ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸುವುದಲ್ಲದೆ ಕೊನೆಗೆ ಕಾಲಿನಿಂದ ಪ್ರಯಾಣಿಕನ ಎದೆಗೆ ತುಳಿದು ರಸ್ತೆಗೆ ದೂಡಿ ಹಾಕಿ, ಆತನಿಗೆ ಜೋರು ಮಾಡುತ್ತಾರೆ. ರಸ್ತೆಗೆ ಬಿದ್ದ ಪ್ರಯಾಣಿಕನನ್ನು ಅಲ್ಲಿಯೇ ಬಿಟ್ಟು ನೇರವಾಗಿ ಬಸ್ ಚಲಾಯಿಸಿಕೊಂಡು ಹೋಗುವ ವಿಡಿಯೋ ವೈರಲ್ ಅಗುತ್ತಿದೆ.