ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.