ಪ್ರವೀಣ್ ನೆಟ್ಟಾರು ಹತ್ಯೆ ಕುರಿತಂತೆ 27-07-2022 ರಂದು ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ.ಸಂಖ್ಯೆ: 63/2022 ಕಲಂ 302 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿತ್ತು. ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿತ್ತು.
ಬಿಜೆಪಿ ಮುಖಂಡನ ಹತ್ಯೆಯ ಹಿನ್ನಲೆ ಕೆಲವೊಂದು ಪ್ರದೇಶಗಳಲ್ಲಿ ಸೆಕ್ಷನ್ 144 ಕೂಡ ಜಾರಿಯಾಗಿತ್ತು. ಬಂದೋಬಸ್ತ್ ಹಾಗೂ ಇನ್ನಿತರ ಕೆಲಸದ ಒತ್ತಡದ ನಡುವೆಯೂ ಸದರಿ ಪ್ರಕರಣದ ಆರೋಪಿತರನ್ನು ಕೆಲವೇ ದಿನಗಳಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿರುವ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಉದಯ ರವಿ, ಹೆಡ್ ಕಾನ್ಸ್ಟೇಬಲ್ಗಳಾದ ಪ್ರವೀಣ್ ರೈ, ಮತ್ತು ಅದ್ರಾಮ ಅವರನ್ನು ಸನ್ಮಾನಿಸಲಾಯಿತು.
ಸದರಿ ಪ್ರಕರಣದಲ್ಲಿ ಆರೋಪಿತರನ್ನು ಶೀಘ್ರ ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಸಹಕರಿಸಿ ಶ್ರದ್ಧೆ ಹಾಗೂ ಕರ್ತವ್ಯ ನಿಷ್ಠೆಯನ್ನು ಗುರುತಿಸಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಹಾಗೂ ವೈಯಕ್ತಿಕವಾಗಿ ಪ್ರಶಂಸಿಸಲಾಯಿತು. ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ಪಡೆದುಕೊಂಡಿದ್ದಾರೆ.