ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಶಾ ತುಂಬೆ, ಕೋಶಾಧಿಕಾರಿಯಾಗಿ ವೆಂಕಟೇಶ್ ಬಂಟ್ವಾಳ ಅವರು ಆಯ್ಕೆಯಾದರು.
ನೂತನ ಅಧ್ಯಕ್ಷರಾದ ಪ್ರಶಾಂತ್ ಪುಂಜಾಲಕಟ್ಟೆಯವರು ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ತೊಡಗಿಸಿಕೊಂಡಿದ್ದು, ನಮ್ಮ ಬಂಟ್ವಾಳ ವಾಹಿನಿಯನ್ನು ಮುನ್ನಡೆಸುತ್ತಿದ್ದಾರೆ. ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿರುವ ಇವರು, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದಾರೆ.
ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮೌನೇಶ ವಿಶ್ವಕರ್ಮರವರು ಕಳೆದ 19 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕನ್ನಡ ಪ್ರಭ ಪತ್ರಿಕೆಯ ತಾಲೂಕು ವರದಿಗಾರರಾಗಿದ್ದಾರೆ. ರಂಗನಿರ್ದೇಶಕ, ತರಬೇತಿದಾರರಾಗಿಯೂ ಗುರುತಿಸಿಕೊಂಡಿರುವ ಇವರು, ಸಂಸಾರ ಜೋಡುಮಾರ್ಗ ತಂಡವನ್ನು ಮುನ್ನಡೆಸುತ್ತಿದ್ದು, ರೋಟರಿ ಪುತ್ತೂರು ಎಲೈಟ್ ನ ಸಕ್ರೀಯ ಸದಸ್ಯರಾಗಿದ್ದಾರೆ.
ಮಹಾಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಹರೀಶ್ ಮಾಂಬಾಂಡಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.