ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರೊಬ್ಬರ ಸರವನ್ನು ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಎಳೆದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಣ್ಣೀರು ಪಂಥ ನಿವಾಸಿ ಇಲ್ಯಾಸ್(26) ಎಂದು ಗುರುತಿಸಲಾಗಿದೆ.
ಇಲ್ಯಾಸ್ ಮೇ.15 ರಂದು ಬೈಕ್ ನಲ್ಲಿ ಬಂದು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಸಾಲು ಮರದ ತಿಮ್ಮಕ್ಕ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರವನ್ನು ಎಗರಿಸಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ಕಳ್ಳತನಕ್ಕೆ ಬಳಸಿದ್ದ ವಾಹನ ಹಾಗೂ ಆತನ ವಶದಲ್ಲಿದ್ದ 2 ಚಿನ್ನ ಲೇಪಿತ ಬೆಳ್ಳಿಯ ಸರಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಟಿ.ಡಿ ನಾಗರಾಜ್ ಪೊಲೀಸ್ ನಿರೀಕ್ಷಕರು, ಬಂಟ್ವಾಳ ಗ್ರಾಮಾಂತರ ಠಾಣೆ ಪಿ ಎಸ್ ಐ ಹರೀಶ್ ಹಾಗೂ ಅವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.