ಬಾಲಕಿಯನ್ನು ಅತ್ಯಾಚಾರಗೈದ ಅಪರಾಧಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಅಪ್ರಾಪ್ತೆಯನ್ನು ಹಲವು ಬಾರಿ ಅತ್ಯಾಚಾರ ಮಾಡಿದ್ದ. ಅಪರಾಧಿಯನ್ನು ಕಡಿರುದ್ಯಾವರ ಕೊಂಬರೋಡಿ ಮನೆ ನಿವಾಸಿ ಬಾಬಿ (48) ಎನ್ನಲಾಗಿದೆ.
ಹಲವು ಬಾರಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೊಂದ ಬಾಲಕಿ ದೂರು ನೀಡಿದ್ದಳು. ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಠಾಣಾ 15/2022 ಕಲಂ 4 & 6 ಫೋಕ್ಸೋ & ಕಾಯ್ದೆ & 376 ಐಪಿಸಿ ಯಂತೆ ಬೆಳ್ತಂಗಡಿ ಠಾಣಾ ಪಿ.ಎಸ್.ಐ ನಂದಕುಮಾರ್ರವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಬಳಿಕ ಈ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ರವರು ಆರೋಪಿ ಬಾಬಿ (48) ಎಂಬಾತನನ್ನು ಬಂಧಿಸಿ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿತನ ಆರೋಪ ಸಾಬೀತಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 (ಫೋಕ್ಸೋ) ಇದರ ನ್ಯಾಯಾಧೀಶರಾದ ರಾಧಾಕೃಷ್ಣರವರು 24.01.2023 ರಂದು ಅಪರಾಧಿಗೆ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂ. ದಂಡ, ದಂಡಕಟ್ಟಲು ತಪ್ಪಿದಲ್ಲಿ 6 ತಿಂಗಳ ಕಠಿಣ ಕಾರಾಗೃಹವಾಸ ವಿಧಿಸಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಐ.ಪಿ.ಎಸ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ಪ್ರತಾಪ್ ಸಿಂಗ್ ಥೋರಾಟ್ರವರ ನಿರ್ದೇಶನದಂತೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ.ರವರು ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದು, ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಹೆಡ್ಕಾನ್ಸ್ಟೇಬಲ್ ವಿಜಯಕುಮಾರ್ ರೈ ರವರು ಕಾರ್ಯನಿರ್ವಹಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟ್ರಮಣ ಸ್ವಾಮಿರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.