

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಜಾಗದ ತಕರಾರಿನ ಹಿನ್ನೆಲೆಯಲ್ಲಿ ತಂಡದಿಂದ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ಬಟ್ಟೆ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಗಂಭೀರ ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದ್ದು, ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳೆಯನ್ನು ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ ವಿಡಿಯೋ ಮಾಡಿದ ಬಗ್ಗೆಯೂ ದೂರು ನೀಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪುಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಹಲ್ಲೆ ಮಾಡಿದ್ದು, ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೇ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂತ್ರಸ್ತೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ ಆರೋಪ ಕೂಡಾ ಇದೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.











