ಮಂಗಳೂರು: ಕರ್ನಾಟಕ ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೇರಳ ಗಡಿನಾಡಿನ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರಿಗೆ ಗಡಿಭಾಗಗಳಲ್ಲಿ ನಿಗಾ ಇರಿಸುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳೊ0ದಿಗೆ ನಡೆದ ವಿಡಿಯೋ ಸಂವಾದದಲ್ಲಿ ಕೊರೊನಾ ಮೂರನೇ ಅಲೆ ತಡೆಯಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಸೂಚನೆ ನೀಡಿದ್ದಾರೆ. ಕೇರಳ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ದಿನಪೂರ್ತಿ ಅಧಿಕಾರಿ ಸಿಬ್ಬಂದಿಯನ್ನು ನಿಯೋಜಿಸಿ ಕೇರಳದಿಂದ ಬರುವವರ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಮತ್ತು ಲಸಿಕೆ ಪಡೆದಿರುವುದನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು.
ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜು ಮತ್ತು ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳನ್ನು ಆರ್ ಟಿ ಪಿ ಸಿ ಆರ್ ತಪಾಸಣೆ ಗೆ ಒಳಪಡಿಸಬೇಕು. ಆರ್ ಟಿ ಪಿ ಸಿ ಆರ್ ಮತ್ತು ರಾಪಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಕೊರೊನಾ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷಿಸಬೇಕು. ಕೇರಳ ಮತ್ತು ಇತರ ರಾಜ್ಯಗಳಿಂದ ಬರುವವರ ಬಗ್ಗೆ ನಿಗಾ ಇಡಬೇಕು. ಲಸಿಕೆಯನ್ನು ಆದ್ಯತೆ ಮೇಲೆ ನೀಡಬೇಕು ಎಂದು ಸೂಚಿಸಿದ್ದಾರೆ.