ಮಂಗಳೂರು: ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಉಲ್ಲಾಳದ ಕುಂಪಲದಲ್ಲಿ ನಡೆದಿದ್ದು, ಆರೋಪಿ ಪತಿ ಜೋಸೆಫ್ ಫ್ರಾನ್ಸಿಸ್ (54) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಚ್ಚಿ ನಿವಾಸಿ ಜೋಸೆಫ್ ಎಂಬವರ ಪುತ್ರಿ ಶೈಮಾ (44) ಎಂಬವರನ್ನು ಜೋಸೆಫ್ ಫ್ರಾನ್ಸಿಸ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಅವರು ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲದಲ್ಲಿ ವಾಸವಾಗಿದ್ದರು.
ಮೇ 11ರಂದು ಕ್ಷುಲ್ಲಕ ವಿಚಾರವೊಂದಕ್ಕೆ ಅವರ ನಡುವೆ ಜಗಳ ನಡೆದಿದೆ. ಈ ಸಂದರ್ಭ ಜೋಸೆಫ್ ಫ್ರಾನ್ಸಿಸ್ ಪತ್ನಿ ಶೈಮಾರಿಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದು, ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಶೈಮಾ ವಿಷ ಸೇವಿಸಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ದಿನ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಶೈಮಾರ ತಂದೆ ಕೊಚ್ಚಿ ನಿವಾಸಿ ಜೋಸೆಫ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಶನಿವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚುವರಿ ತನಿಖೆಗಾಗಿ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.