ಮಂಗಳೂರು: ನಗರದ ಕಾವೂರು ಕಟ್ಟೆ ಪರಿಸರದ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಂಗಳೂರು, ಮಂಗಳೂರು, ಮೈಸೂರು, ಉಡುಪಿ ಹಾಗೂ ಇತರ ಕಡೆಗಳಲ್ಲಿನ ಯುವತಿಯರನ್ನು/ ಮಹಿಳೆಯರನ್ನು ಮಾನವ ಕಳ್ಳಸಾಗಾಟ ಮೂಲಕ ಮಂಗಳೂರಿಗೆ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಒಬ್ಬಾಕೆಯನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ದಲ್ಲಾಳಿಗಳಾದ ಅಬ್ದುಲ್ ಹಫೀಸ್, ರಮ್ಲಾತ್ ಎಂಬವರನ್ನು ಬಂಧಿಸಲಾಗಿದೆ.
ದಸ್ತಗಿರಿ ಮಾಡಿದ ಆರೋಪಿಗಳಿಂದ ರೂ. 10,060/- ನಗದು, 3 ಮೊಬೈಲ್ ಫೋನುಗಳು ಮತ್ತು ಸ್ಕಾರ್ಪಿಯೋ ಕಾರು ಹೀಗೆ ಒಟ್ಟು ರೂ. 3,25,560/- ಮೊತ್ತದ ಸೊತ್ತನ್ನು ಸ್ವಾಧೀನಪಡಿಸಿಕೊಂಡಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.