ಮಂಗಳೂರು: ಮಾದಕ ವಸ್ತುಗಳ ಬಳಕೆ ಸಾಮಾಜಿಕ ಪಿಡುಗಾಗಿದ್ದು, ಕಾಲೇಜುಗಳ ಸುತ್ತಾ ಮುತ್ತಾ ಆ ವಸ್ತುಗಳ ಬಳಕೆ ಅಥವಾ ಮಾರಾಟವಾಗುತ್ತಿದ್ದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ವಿದ್ಯಾಥಿಗಳಿಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಸೇಂಟ್ ಅಲೋಶಿಯಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಜು.2ರ ಶನಿವಾರ ನಗರದ ಸೇಂಟ್ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಿಕೆ ದಿನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಾರಕವಾಗಿರುವ ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸುವಲ್ಲಿ ಯುವಕರು ಕೈಜೋಡಿಸಬೇಕು, ಅಂತಹಾ ಚಟುವಟಕೆಗಳನ್ನು ಕಂಡವರು ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳಿಗೆ ಮಾಹಿತಿ ನೀಡಬೇಕು, ಆ ಮೂಲಕ ಯುವಕರು ಜಿಲ್ಲಾಡಳಿತ ಮತ್ತು ಸಮಾಜದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು ಕಿವಿ ಮಾತು ಹೇಳಿದರು.
ಹದಿಹರೆಯದಲ್ಲಿ ಯುವ ಜನತೆ ಸ್ವ-ನಿಯಂತ್ರಣ ಕಳೆದುಕೊಂಡು ಅಥವಾ ಸಹವಾಸ ದೋಷದಿಂದ ಮಾದಕ ವಸ್ತುಗಳೆಡೆಗೆ ವಾಲುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲೂ ಯುವಕರನ್ನು ದಾರಿ ತಪ್ಪಿಸುವ, ಮಾದಕ ದ್ರವ್ಯಗಳನ್ನು ಪೂರೈಸುವ ಕೆಟ್ಟ ಜಾಲಗಳಿಂದ ಹಾಗೂ ಕೆಟ್ಟ ಮಾರ್ಗಗಳಿಗೆ ಎಳೆಯುವ ಗೆಳೆಯರಿಂದ ದೂರವಿರುವಂತೆ ಅವರು ಸಲಹೆ ನೀಡಿದರು.