ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಕಾರ್ಯಕರ್ತರು 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಶಿವಕುಮಾರ್ ಗುಣಾರಿ ತಿಳಿಸಿದ್ದಾರೆ.
ರಟ್ಟಿಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಲೋಕಾರ್ಪಣೆ ಹಿನ್ನಲೆ ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಯ ವೇಳೆ ಸುಮಾರು ೧೫೦ ಜನರು ಪಾಲ್ಗೊಂಡಿದ್ದರು. ಈ ವೇಳೆ ದಾಂಧಲೆ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ ಶಿವಕುಮಾರ್ ಗುಣಾರಿ, ‘ರಟ್ಟಿಹಳ್ಳಿ ಪಟ್ಟಣದಲ್ಲಿ ಇಂದು ಬೈಕ್ ರಾಲಿ ನಡಿಯುತ್ತಿದ್ದ ವೇಳೆ ಕಾರ್ಯಕರ್ತರು ರ್ಯಾಲಿ ಮಾಡುವ ಮಾರ್ಗಬಿಟ್ಟು ಕಾರಂಜಿ ಸರ್ಕಲ್ ಗೆ ಹೋಗಿದ್ದಾರೆ. ಬಳಿಕ ಅಲ್ಲಿದ್ದ 8 -10 ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೋಲಿಸರು ಪರಿಸ್ಥಿತಿಯನ್ನು ಹತೋಟೆಗೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 15 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ರಟ್ಟೇಹಳ್ಳಿಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಪ್ರಮುಖ ಬೀದಿಯಲ್ಲಿ ಬೈಕ್ ರ್ಯಾಲಿ ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರು ಮಸೀದಿ, ಮನೆಗಳು ಹಾಗೂ ಉರ್ದು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ.
ಇನ್ನು ಕಲ್ಲು ತೂರಾಟದ ಘಟನೆಗಳ ನಂತರ, ರಟ್ಟೀಹಳ್ಳಿಯಲ್ಲಿ ಪೊಲೀಸರು ನಿಗಾ ವಹಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಮಾರ್ಚ್ ಫಾಸ್ಟ್ ನಡೆದಿದೆ.