ಬೆಳಗಾವಿ: ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಸೇರಿಕೊಂಡು ಕಿರುಕುಳ ಕೊಡುತ್ತಿದ್ದಾರೆ ಎಂದು ಬೇಸತ್ತು ಅದೇ ಶಾಲೆಯ ಸಹ ಶಿಕ್ಷಕಿಯೊಬ್ಬರು ಡೆತ್ನೋಟ್ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಯಭಾಗ ರೈಲು ನಿಲ್ದಾಣದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅನ್ನಪೂರ್ಣ ರಾಜು ಬಸಾಪೂರೆ (55) ಎಂಬ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
ಮೃತ ಶಿಕ್ಷಕಿ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ನಿವಾಸಿ ಆಗಿದ್ದು, ಖಾಸಗಿ ಅನುದಾನಿತ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಈ ಖಾಸಗಿ ಶಿಕ್ಷಣ ಸಂಸ್ಥೆಯ ಹೆಡ್ ಮಾಸ್ಟರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ನೋಟ್ ಬರೆದಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ನೋಟ್ನಲ್ಲಿ ಮುಖ್ಯಶಿಕ್ಷಕಿ ಹಾಗೂ ಸಹ ಶಿಕ್ಷಕಿಯ ಹೆಸರನ್ನೂ ಬರೆದಿಟ್ಟಿದ್ದಾರೆ.
ಡೆತ್ ನೋಟ್ನಲ್ಲಿ ಏನಿದೆ..?
ಮೃತ ಶಿಕ್ಷಕಿ ಬರೆದ ಡೆತ್ ನೋಟ್ ನಲ್ಲಿ “ನನ್ನ ಸಾವಿಗೆ ಹೆಡ್ ಮಾಸ್ಟರ್ ಜಮಾದರ್ ಸರ್, ಉಮಾ ಟೀಚರ್, ಮಯೂರಿ ಕುಡುಚಿ” ಇವರೇ ತನ್ನ ಸಾವಿಗೆ ಕಾರಣ ಎಂದು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ಘಟನೆ ರಾಯಭಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.