ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗಡಿಪಾರು ಆದೇಶ ನೀಡಲಾಗಿದ್ದ ರೌಡಿಶೀಟರ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಹಲಸೂರಿನ ಜೋಗುಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರ್ತಿಕ್ ಹಲಸೂರು ಕೊಲೆಯಾದ ರೌಡಿ ಶೀಟರ್. ಘಟನೆ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲಸೂರಿನ ಜೋಗುಪಾಳ್ಯ ಮುಖ್ಯರಸ್ತೆಯಲ್ಲಿ ಕಾರ್ತಿಕ್ ನಡೆದುಕೊಂಡು ಬರುತ್ತಿದ್ದ. ಈ ವೇಳೆ ಮಾರಕಾಸ್ತ್ರಗಳೊಂದಿಗೆ ಬಂದ ಹಂತಕರು ಏಕಾಏಕಿ ಮೇಲೆರಗಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಕಾರ್ತಿಕ್ ಪಕ್ಕದಲ್ಲೇ ಇದ್ದ ಗಲ್ಲಿಯಲ್ಲಿ ಓಡಿಹೋಗಿದ್ದ. ಹಿಮ್ಮೆಟ್ಟಿ ಬಂದ ಹಂತಕರು ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ರೌಡಿ ಶೀಟರ್ ಮೇಲೆ ಅತ್ಯಾಚಾರ, ಕೊಲೆ, ಡಕಾಯಿತಿ ಸೇರಿದಂತೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ದಾಖಲಾಗಿದ್ದವು. ಅಷ್ಟೇ ಅಲ್ಲದೇ ಚುನಾವಣೆ ಸಮಯದಲ್ಲಿ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರು ಗಡಿಪಾರು ಮಾಡಿ ನೋಟಿಸ್ ಕೂಡ ನೀಡಿದ್ದರು.
ಘಟನೆ ಬಗ್ಗೆ ಮಾತನಾಡಿದ ಡಿಸಿಪಿ ಡಾ. ಭೀಮಾಶಂಕರ್ ಗುಳೇದ್, “ಹತ್ಯೆಯಾದ ಕಾರ್ತಿಕ್ ಮೇಲೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 11 ಪ್ರಕರಣಗಳು ದಾಖಲಾಗಿತ್ತು. ಈ ಮುಂಚೆ ಗುಂಡಾ ಕಾಯಿದೆ ಅಡಿಯಲ್ಲಿ 2019ರಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. 2021-22ರಲ್ಲಿ ಚಟುವಟಿಕೆಯನ್ನು ನಿಯಂತ್ರಿಸಲು ಗಡಿಪಾರು ಕೂಡ ಮಾಡಿದ್ದೆವು. ಅಷ್ಟೇ ಅಲ್ಲದೇ ಚುನಾವಣೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು” ಎಂದು ತಿಳಿಸಿದರು.