ರಾಜ್ಯಾದ್ಯಂತ ರೂಪಾಂತರಿ ಓಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ಆದೇಶದಂತೆ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ವಾರಾಂತ್ಯದ ಶುಕ್ರವಾರ ರಾತ್ರಿ ಗಂಟೆ 10ರಿಂದ ಸೋಮವಾರ ಬೆಳಗ್ಗೆ ಗಂಟೆ 8ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ರವಿವಾರಗಳಂದು ಶ್ರೀ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಸಾಮಾಜಿಕ ಅಂತರ ಮತ್ತಿತರ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.