ವಿಟ್ಲ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯದ ಪುನರಪಿ ನೆನಪಿಗಾಗಿ ಪುತ್ತೂರಿನಿಂದ ವಿಟ್ಲ ತನಕ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಆಶ್ರಯದಲ್ಲಿ ಆ.22ರಂದು ಪುತ್ತೂರಿನಿಂದ ಕಾಲ್ನಡಿಗೆ ಜಾಥಾ ಆರಂಭಗೊಳ್ಳಲಿದ್ದು, ಸಾಯಂಕಾಲ ವಿಟ್ಲದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ.,ರವರು ಹೇಳಿದರು.
ಅವರು ಆ.19ರಂದು ವಿಟ್ಲದಲ್ಲಿರುವ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಸ್ವಾತಂತ್ರ್ಯದ ಅಮೃತಮಹೋತ್ಸವದ ಈ ಸುಸಂದರ್ಭದಲ್ಲಿ ನಾಡಿಗೆ ಉತ್ತಮ ಸಂದೇಶ ನೀಡುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮದ ಆಯೋಜನೆಯ ಉದ್ದೇಶವಾಗಿದೆ. ಪುತ್ತೂರಿನ ದರ್ಬೆ ವೃತ್ತದಿಂದ ಆರಂಭವಾಗುವ ಈ ಒಂದು ಕಾಲ್ನಡಿಗೆ ಜಾಥವು ಕಬಕ ಮಾರ್ಗವಾಗಿ ಅಳಕೆಮಜಲು ಕಂಬಳಬೆಟ್ಟು ಆಗಿ ಸಾಯಂಕಾಲ ವಿಟ್ಲ ತಲುಪಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ೨೦೦೦ಕ್ಕಿಂತಲೂ ಹೆಚ್ಚಿನ ಜನರು ಸೇರುವ ನಿರೀಕ್ಷೆ ಇದೆ. ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ನಿಟ್ಟಿನಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಈ ಒಂದು ಜಾಥ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಮುನ್ನುಡಿಯಾಗಬೇಕು ಎನ್ನುವುದು ನಮ್ಮ ಕನಸಾಗಿದೆ. ಈ ದೇಶದಲ್ಲಿ, ನಾಡಿನಲ್ಲಿ ಸಮಾನತೆ, ಶಾಂತಿ, ಸೌಹಾರ್ದತೆಯನ್ನು ಮೂಡಿಸುವಂತಹ ಜಾಥ ಇದಾಗಬೇಕೆನ್ನುವ ಪ್ರಯತ್ನ ನಮ್ಮದಾಗಿದೆ. ಸಾಯಂಕಾಲ ವಿಟ್ಲದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೆಪಿಸಿಸಿ ವಕ್ತಾರರಾದ ನಿಖಿಲ್ ರಾಜ್ ಮೌರ್ಯ ರವರು ಸಮಾರೋಪ ಭಾಷಣವನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಕೆ. ಪಿ. ಸಿ. ಸಿ. ಮಾಜಿ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಡಿ ಸಿ. ಸಿ. ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ವಕ್ತಾರ ರಮಾನಾಥ ವಿಟ್ಲ, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಫಾರೂಕ್, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ಎಸ್. ಕೆ. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.