
ನವದೆಹಲಿ: ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ನಂತರ ಭದ್ರತಾ ಸಿಬ್ಬಂದಿ ಆಸ್ಪತ್ರೆಯನ್ನು ಸುತ್ತುವರೆದಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿದ್ದ ನಾಗರಿಕರ ನಡುವೆ ನುಸುಳಿಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿರುವ ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಒಬ್ಬ ವ್ಯಕ್ತಿಗೆ ಗುಂಡಿನ ದಾಳಿಯಲ್ಲಿ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಲಸೆ ಕಾರ್ಮಿಕರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಜನರನ್ನು ಗುರಿಯಾಗಿಸಿಕೊಂಡು ಇತ್ತೀಚಿನ ನಾಗರಿಕ ಹತ್ಯೆಗಳ ನಂತರ ಇದು ಮೊದಲ ಪ್ರಮುಖ ಭಯೋತ್ಪಾದಕ ಘಟನೆಯಾಗಿದೆ. ಭಯೋತ್ಪಾದಕರ ಮತ್ತಷ್ಟು ದಾಳಿಗಳನ್ನು ತಡೆಯಲು ಶ್ರೀನಗರದಲ್ಲಿ ಹೆಚ್ಚುವರಿ 50 ಕಂಪನಿಗಳ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.










