ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟಕ್ಕೆ 29 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ, ಸೇರ್ಪಡೆಗೊಂಡಿದ್ದಾರೆ. ಒಂದೆಡೆ ಸಂಪುಟ ರಚನೆ ನಡೆದರೆ, ಮತ್ತೊಂದೆಡೆ ಬಿಜೆಪಿಯಲ್ಲಿ ಮಹತ್ವದ ವಿದ್ಯಮಾನ ನಡೆದಿದೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರನ್ನು ಬದಲಾವಣೆ ಮಾಡಿ, ಆ ಸ್ಥಾನಕ್ಕೆ ಅರವಿಂದ ಲಿಂಬಾವಳಿಯನ್ನು ನೇಮಕ ಮಾಡುವ ಕುರಿತು ಚರ್ಚೆ ನಡೆದಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿಯೇ ಅವರನ್ನು ಸಂಪುಟದಿಂದ ಹೊರಗಿಟ್ಟಿರುವುದಾಗಿಯೂ ತಿಳಿದು ಬಂದಿದೆ.
ಈ ಕುರಿತಂತೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಬಿಜೆಪಿ ಪಕ್ಷಕ್ಕೂ ಕೂಡ ಮೇಜರ್ ಸರ್ಜರಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧಾರ ಕೈಗೊಂಡಿದ್ದು, ಮೂಲತಹ ಪಕ್ಷದಲ್ಲಿ ಅಪಾರ ಸಂಪರ್ಕ ಮತ್ತು ಉನ್ನತ ಮಟ್ಟದಿಂದ ಬೆಳೆದು ಬಂದಂತಹ ಲಿಂಬಾವಳಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸೋ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಂಪುಟದಲ್ಲಿ ಈಗಾಗಲೇ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರಿಗೆ ಹೆಚ್ಚು ಆದ್ಯತೆ ನೀಡಿರುವುದರಿಂದ ಇತ್ತೀಚಿನ ದಿನಗಳಲ್ಲಿ, ದಲಿತ ಸಮುದಾಯ ಬಿಜೆಪಿ ಪರ ಕ್ರಮೇಣ ಒಲವು ತೋರುತ್ತಿದೆ. ಈ ಸಮುದಾಯವನ್ನು ಇನ್ನಷ್ಟು ಗಟ್ಟಿಗೊಳಿಸೋ ನಿಟ್ಟಿನಲ್ಲಿ, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತ ನಾಯಕನನ್ನು ನೇಮಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. ಈ ಕುರಿತು ಸದ್ಯದಲ್ಲೇ ಮಾಹಿತಿ ಹೊರ ಬೀಳಲಿದೆ ಎನ್ನಲಾಗಿದ್ದು, ಆ ಬಗ್ಗೆ ಕಾದು ನೋಡಬೇಕಿದೆ.