
ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಸತ್ಯಸಾಯಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ವಿದ್ಯುತ್ ಕಂಬಗಳು ಮುರಿದು ಬಿದ್ದು, ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಬೆಸ್ಕಾಂ ಸಿಬ್ಬಂದಿ ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳನ್ನು ಬದಲಾಯಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಶಾಲೆಯ ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಇದ್ದಕ್ಕಿಂದಂತೆ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದವು. 7ನೇ ತರಗತಿ ವಿದ್ಯಾರ್ಥಿಗಳಾದ ದಿನೇಶ್, ಭರತ್, ಚರಣ್ ತ್ರೀವ ಗಾಯಗೊಂಡಿದ್ದಾರೆ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ. ದಿನೇಶ್ ತಲೆಗೆ ತೀವ್ರ ಪೆಟ್ಟಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ಗೆ ಸೇರಿಸಲಾಗಿದೆ. ಭರತ್ ಎಂಬ ವಿದ್ಯಾರ್ಥಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚರಣ್ ಕಾಲಿಗೆ ಗಾಯವಾಗಿದ್ದು, ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ, ಇನ್ಸ್ಸ್ಪೆಕ್ಟರ್ ದಯಾನಂದ, ಪೊಲೀಸ್ ಸಬ್ ಇನ್ಸ್ಸ್ಪೆಕ್ಟರ್ ಮುನಿರತ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ್ದಾರೆ.









