ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಅವರನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಭಕ್ತರ ಗಸೋಗಿನಲ್ಲಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್ ನಲ್ಲಿ ರಿಸಪ್ಶನ್ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.
ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. “ಜುಲೈ 2 ರಂದು ಹೋಟೆಲ್ಗೆ ಆಗಮಿಸಿದ್ದ ಚಂದ್ರಶೇಖರ್ ಗುರೂಜಿ ನಾಳೆ ಹೋಟೆಲ್ ರೂಮ್ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪ್ಶನ್ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಅವರಿಗೆ ಚಾಕು ಇರಿದಿದ್ದಾರೆ’ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ.
ಸಿಜಿ ಪರಿವಾರ್ ಗ್ಲೋಬಲ್ ವಿಷನ್ನ ಚೇರ್ಮನ್ ಕೂಡ ಆಗಿದ್ದ ಚಂದ್ರಶೇಖರ್ ಗುರೂಜಿ 2016ರಲ್ಲಿ ಸರಳ ಜೀವನ ಎನ್ನುವ ಇನ್ಫೋ ಎಂಟರ್ಟೇನ್ಮೆಂಟ್ ಟಿವಿ ಚಾನೆಲ್ ಅನ್ನೂ ಆರಂಭ ಮಾಡಿದ್ದರು. ಚಂದ್ರಶೇಖರ ಗುರೂಜಿಯವರು 2002 ರಲ್ಲಿ ಸಿಜಿ ಪರಿವಾರ್ ಎನ್ನುವ ಎಂಬ ಖಾಸಗಿ ಲಿಮಿಟೆಡ್ ಕಂಪನಿಯನ್ನು ಆರಂಭಿಸಿದ್ದರು. ಆ ಮೂಲಕ 350 ಕ್ಕೂ ಹೆಚ್ಚು ಶಿಷ್ಯರು ಮತ್ತು ಅನುಯಾಯಿಗಳೊಂದಿಗೆ ಸರಳ ವಾಸ್ತು ವಿಚಾರವನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು.