ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೋಗುವಾಗ ಚಾಲಕನ ಅಜಾಗ್ರತೆಯಿಂದ ಬುಲೋರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿ ಸಂಚರಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಈ ದುರಂತ ಘಟನೆಯಲ್ಲಿ ಇಬ್ಬರು ಬಾಲಕಿಯರು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿದ್ದಾರೆ.
ಮೃತರನ್ನು ಹನುಮವ್ವ (25), ದೀಪಾ (31), ಸವಿತಾ (17), ಸುಪ್ರೀತಾ (11), ಇಂದಿರಾವ್ವ (24) ಮತ್ತು ಮಾರುತಿ (42) ಎಂದು ಗುರುತಿಸಲಾಗಿದೆ.
ಇವರೆಲ್ಲರೂ ಹುಲಂದ ಗ್ರಾಮದಿಂದ ಪ್ರಸಿದ್ಧ ಸೌಂದತ್ತಿ ಯಲ್ಲಮ್ಮ ದೇವಸ್ಥಾನದ ಕಡೆಗೆ ಪ್ರಯಾಣಿಸುತ್ತಿದ್ದರು. ರಸ್ತೆಯ ತಿರುವಿನಲ್ಲಿ ಅವರು ಸಂಚರಿಸುತ್ತಿದ್ದ ಬೊಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ಢಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದರು. ಸ್ಥಳಕ್ಕೆ ಎಸ್ಪಿ ಡಾ. ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾತ್ರಾರ್ಥಿಗಳು ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು. ಆದರೆ ಮಾರ್ಗ ಮಧ್ಯೆ ಅವರನ್ನು ಬೊಲೆರೊ ವಾಹನ ಚಾಲಕ ತನ್ನ ವಾಹನದಲ್ಲಿ ಹತ್ತಿಸಿ ಡ್ರಾಪ್ ಕೊಡುವುದಾಗಿ ಹೇಳಿ ಕರೆದೊಯ್ದಿದ್ದ. ಆದರೆ ಅವರು ವಾಹನ ಹತ್ತಿ ಕೆಲವೇ ನಿಮಿಷಗಳಲ್ಲಿ ಅಪಘಾತ ಸಂಭವಿಸಿತ್ತು.
ಇನ್ನು ಘಟನೆ ಬಗ್ಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.