ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಶ್ರೀಮತಿ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಭೈರಪ್ಪನವರಿಗೆ ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿ ಲಭಿಸಿದರೆ, ಸಮಾಜಸೇವೆಗಾಗಿ ಸುಧಾಮೂರ್ತಿ ಅವರಿಗೆ ಲಭಿಸಿದೆ.
ಸಮಾಜ ಸೇವೆ, ಮಹಿಳಾ ಸಬಲೀಕರಣ, ಶಿಕ್ಷಣ, ಕಲೆ ಮತ್ತು ಸಂಸ್ಕೃತಿ, ವನ್ಯಜೀವಿ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಕುರಿತಾಗಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಮುರ್ಮು ಅವರು “ಸಮಾಜ ಕಾರ್ಯಕ್ಕಾಗಿ ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರದಾನ ಮಾಡಲಾಯಿತು. ಲೋಕೋಪಕಾರಿ, ಹೆಸರಾಂತ ಲೇಖಕಿ ಮತ್ತು ಸುಧಾಮೂರ್ತಿ ಫೌಂಡೇಶನ್ನ ಅಧ್ಯಕ್ಷೆ, ಅವರು ಆರೋಗ್ಯ, ಶಿಕ್ಷಣ, ಕಲೆ ಮತ್ತು ಸಂಸ್ಕೃತಿ, ಪ್ರಾಣಿ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ” ಎಂದು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.