ಯಾದಗಿರಿ: ಹೈಕೋರ್ಟ್ ಇಂದು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಮಹತ್ವದ ತೀರ್ಪು ಹೊರಡಿಸಿದೆ. ಇಸ್ಲಾಂನಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯವಲ್ಲ ಎಂಬುದಾಗಿ ಐತಿಹಾಸಿಕ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಬಹಿಷ್ಕರಿಸಿದಂತ ವಿದ್ಯಾರ್ಥಿನಿಯರು, ಮನೆಗೆ ವಾಪಾಸ್ ಆಗಿರುವ ಘಟನೆ, ಕೆಂಬಾವಿ ಪಟ್ಟಣದಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು, ಇಂದು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗುವುದಕ್ಕೆ ಆಗಮಿಸಿದ್ದರು. ಆದರೆ ಹೈಕೋರ್ಟ್ ತೀರ್ಪು ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಆದೇಶ ನೀಡಿದ ಕಾರಣ, ಪರೀಕ್ಷೆ ಬಹಿಷ್ಕರಿಸಿ, ಮನೆಗೆ ವಾಪಾಸ್ ಹೋಗಿರುವುದಾಗಿ ತಿಳಿದು ಬಂದಿದೆ.
ಇನ್ನು ಹಿಜಾಬ್ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.