ಮಂಗಳೂರು: ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಭಾರತದಲ್ಲಿ ಎರಡನೇ ಅಲೆ ತೀವ್ರವಾಗಿ ಹಬ್ಬುತ್ತಿದೆ ಎಂದು ಹೇಳಲಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಮಾರ್ಚ್ 29ರಿಂದಲೇ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಇಷ್ಟು ಮಾತ್ರವಲ್ಲದೆ ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚು. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಮಾರ್ಚ್ 29 ರಿಂದ ಮುಂದಿನ ಸೂಚನೆಯವರೆಗೆ ಜಿಲ್ಲೆಯಾದ್ಯಂತ ಮೇಲ್ಕಂಡ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.