
ಬಂಟ್ವಾಳ: ಅಕ್ರಮ ಜಾನುವಾರು ವಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿ, 6 ಜಾನುವಾರುಗಳು, ಕತ್ತರಿಸಲಾದ ಮಾಂಸ, ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಮೇ 27ರಂದು ರಾತ್ರಿ ನಡೆದಿದೆ.ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿರವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ವೇಳೆ ಮನೆಯೊಂದರ ಹಿಂಭಾಗದ ಕೊಟ್ಟಿಗೆಯಲ್ಲಿ ಮಾಂಸ ಕತ್ತರಿಸಲಾಗುತ್ತಿರುವುದು ಪತ್ತೆಯಾಯಿತು.ತಕ್ಷಣ ಧಾಳಿ ನಡೆಸಿದ ಪೊಲೀಸರು ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳನ್ನು ಸಜಿಪಮೂಡ ನಿವಾಸಿ ಮುಸ್ತಾಪ್ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಯಿತು.ವಿಚಾರಣೆ ವೇಳೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿರುವುದು ದೃಢಪಟ್ಟಿದೆ.
ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, 6 ಜಾನುವಾರುಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ವಿವಿಧ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.








